ಚಾಮರಾಜನಗರ, ,ಡಿ.0೬ (DaijiworldNews/ AK): ವಿದ್ಯಾರ್ಥಿಗಳ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ. ಜಾತಿಯಿಂದ ಯಾರೂ ಪ್ರತಿಭಾವಂತರಾಗುವುದಿಲ್ಲ. ಎಲ್ಲರಲ್ಲಿಯೂ ಪ್ರತಿಭೆಯಿದ್ದು ಅದು ಹೊರಬರಲು ಅವಕಾಶಗಳು ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸತ್ತೇಗಾಲದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷಮಮ್ಮ ಸೋಸಯ್ಯನ ಸಿದ್ದಯ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಪ್ರಬಲವಾದ ಅಸ್ತ್ರ.ಎರಡು ಕೋಟಿ ರೂ.ಗಳನ್ನು ವೆಚ್ಚ ಮಾಡಿ ನಿರ್ಮಾಣವಾಗಿರುವ ಶಾಲೆಯಲ್ಲಿ ಸುಸಜ್ಜಿತ ಪ್ರಯೋಗಾಲಯ, ಗ್ರಂಥಾಲಯಗಳನ್ನು ನಿರ್ಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಮರಿಸ್ವಾಮಿ ಸ್ವಂತ ಶ್ರಮದಿಂದ ಐಪಿಎಸ್ ಆಗಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ದೊರಕುವಂತೆ ಮಾಡಿದ್ದಾರೆ. ಸ್ವಾತಂತ್ಯ್ರಕ್ಕೂ ಮುನ್ನ ಶೂದ್ರರು, ದಲಿತರಿಗೆ ಅವಕಾಶಗಳೇ ಇರಲಿಲ್ಲ. ಅಂಬೇಡ್ಕರ್ ಅವರು ಕಷ್ಟಪಟ್ಟು ವಿದ್ಯಾವಂತರಾದರು. ಶಿಕ್ಷಣ ಪ್ರಬಲವಾದ ಅಸ್ತ್ರ. ಶಿಕ್ಷಣದಿಂದ ವಂಚಿತರಾದವರು ಸ್ವಾಭಿಮಾನದಿಂದ, ಗೌರವದಿಂದ ಬದುಕುವುದು ಕಷ್ಟವಾಗುತ್ತದೆ. ಅದಕ್ಕಾಗಿ ಎಲ್ಲರೂ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.
ಗುರಿ ಇಟ್ಟುಕೊಂಡು ಸಾಧನೆ ಮಾಡಿ:
ನಾವು ವಿದ್ಯಾರ್ಥಿಗಳಾಗಿದ್ದಾಗ ಬರಿಗಾಲಿನಲ್ಲಿ ಶಾಲೆಗೆ ತರಳುತ್ತಿದ್ದೆವು. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ವಿದ್ಯಾರ್ಥಿಯೂ ಶೂ, ಸಾಕ್ಸ್ ಹಾಗೂ ಸಮವಸ್ತವನ್ನು ಹಾಕಿಕೊಳ್ಳಬೇಕೆಂದು ಶೂಭಾಗ್ಯ ಕಾರ್ಯಕ್ರಮವನ್ನು ಜಾರಿ ಮಾಡಿದ್ದೆ. ಈಗ ಹಾಲು, ರಾಗಿ ಮಾಲ್ಟ್, ಮೊಟ್ಟೆ, ಚಿಕ್ಕಿ, ಬಾಳೆಹಣ್ಣು, ಸಮವಸ್ತ, ಪುಸ್ತಕವನ್ನು ಕೊಡುತ್ತಿದ್ದೇವೆ. ಹಾಗಾಗಿ ಮಕ್ಕಳು ಓದಬೇಕು. ವಿದ್ಯೆಯಿಂದ ವಂಚಿತರಾಗಬಾರದು ಎಂದರು.
ಮಕ್ಕಳಿಗೆ ಆರ್ಥಿಕವಾಗಿ ತೊಂದರೆಯಾಗಬಾರದು ಎಂದು ಗೃಹಲಕ್ಷಿ ಕಾರ್ಯಕ್ರಮವನ್ನು ಜಾರಿ ಮಾಡಿದ್ದೇವೆ. ಜನರಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು ಎಂದು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡುತ್ತಿದೆ. ಗ್ಯಾರಂಟಿಗಳಿಗೆ 56 ಸಾವಿರ ಕೊಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದರು.ನಾನು ಓದದೇ ಹೋಗಿದ್ದರೆ ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ. ರಾಚಯ್ಯನವರು ಕಾನೂನು ಓದಿದ್ದರಿಂದ ಸಚಿವರು ಹಾಗೂ ರಾಜ್ಯಪಾಲರಾದವರು. ಮರಿಸ್ವಾಮಿಯವರು ಓದಿದದರಿಂದ ಐ.ಪಿ.ಎಸ್ ಅಧಿಕಾರಿಯಾದರು. ಅದಕ್ಕೆ ದಲಿತರು, ಹಿಂದುಳಿದವರು, ಮಹಿಳೆಯರು, ಅಲ್ಪಸಂಖ್ಯಾತರು ಜೀವನದಲ್ಲಿ ಗುರಿಯಿಟ್ಟುಕೊಂಡು ಸಾಧನೆ ಮಾಡಬೇಕು ಎಂದು ಕರೆ ನೀಡಿದರು.