ಬೆಳಗಾವಿ,,ಡಿ.16(DaijiworldNews/AK): ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅವರು ಇಂದು ಸುವರ್ಣಸೌಧದಲ್ಲಿ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಈ ವಿಷಯದ ಕುರಿತು ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಶೇ.61ರಷ್ಟು ಸಿಸೇರಿಯನ್ ಹೆರಿಗೆ ಮಾಡಲಾಗುತ್ತಿದೆ. ಸಿಸೇರಿಯನ್ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ ಎಂದರು.
ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನದಲ್ಲಿ ಹೇಳಿದರು.