ಬೆಂಗಳೂರು, ಡಿ.17(DaijiworldNews/AA): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ.

6 ತಿಂಗಳ ಹಿಂದೆ ಜೈಲು ಪಾಲಾಗಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆ ಇಂದು ಬೆಳಗ್ಗೆ ಪವಿತ್ರಾ ಗೌಡ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆಗೆ 14ನೇ ಆರೋಪಿ ಪ್ರದೂಶ್ ಕೂಡ ಬಿಡುಗಡೆಯಾಗಿದ್ದಾನೆ.
ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ.
ಆರೋಪಿಗಳನ್ನು ಬಂಧಿಸಿದ ಬಳಿಕ ಪ್ರಾಸಿಕ್ಯೂಷನ್ ತಕ್ಷಣವೇ ಇವರನ್ನು ಯಾಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಈ ಹಿನ್ನೆಲೆ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತಿಳಿಸಿದೆ.