ಬೆಂಗಳೂರು, ಜ.16 (DaijiworldNews/AK): ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ರಾಜ್ಯ ಸರಕಾರಕ್ಕೆ ಬುದ್ಧಿ ಹೇಳುವ ದೃಷ್ಟಿಯಿಂದ ಹೋರಾಟಕ್ಕೆ ಬೆಂಬಲ ನೀಡಿದ್ದಾಗಿ ತಿಳಿಸಿದರು.
ರಾಜ್ಯ ವಿದ್ಯಾರ್ಥಿಗಳ ಒಕ್ಕೂಟದಿಂದ ಕೆಪಿಎಸ್ಸಿಯಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಹೋರಾಟ ನಿರತರಾಗಿದ್ದಾರೆ. ಪದೇಪದೇ ಪರೀಕ್ಷೆ ಮುಂದೂಡುವುದು, ಪ್ರಶ್ನೆಪತ್ರಿಕೆಗಳ ಸೋರಿಕೆ, ಪ್ರಶ್ನೆಪತ್ರಿಕೆಗಳನ್ನು ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಸಮಸ್ರಾರು ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ವಿವರಿಸಿದರು.
ಜಾತಿ ಜನಗಣತಿ ಪಗಡೆ ಆಟವಾಗಿ ಪರಿಗಣಿಸಿದ ಸಿಎಂ
ಜಾತಿ ಜನಗಣತಿಯನ್ನು ಮುಖ್ಯಮಂತ್ರಿಯವರು ಪಗಡೆ ಆಟ ಎಂದು ಪರಿಗಣಿಸಿದಂತಿದೆ. ಯಾವಾಗ ಅವರ ಸಿಎಂ ಕುರ್ಚಿ ಅಲ್ಲಾಡುತ್ತದೋ ಅವಾಗ ಜಾತಿ ಜನಗಣತಿಯನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳುತ್ತಾರೆ. ಕುರ್ಚಿ ಭದ್ರವಾಗುವ ಹಾಗಿದ್ದಾಗ ಅದನ್ನು ಮುಂದೂಡುವುದಾಗಿ ಹೇಳುತ್ತಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ಒಂದೆಡೆ ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಿದೆ. ಜಾತಿ ಜನಗಣತಿ ವಿಚಾರದಲ್ಲಿ ಹುಚ್ಚಾಟ ಮಾಡುವುದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು. ಮುಖ್ಯಮಂತ್ರಿಯ ಸ್ಥಾನದಲ್ಲಿ ಕುಳಿತವರು ಈ ರೀತಿ ಹುಡುಗಾಟಿಕೆ ಮಾಡುವುದು ಅಕ್ಷಮ್ಯ ಅಪರಾಧ ಎಂದು ನುಡಿದರು.