ಬೆಳಗಾವಿ, ಫೆ.25 (DaijiworldNews/AA): ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ್ದ ಪೋಕ್ಸೋ ಕೇಸ್ ಅನ್ನು ಬಾಲಕಿಯ ಪೋಷಕರು ವಾಪಸ್ ಪಡೆಯುತ್ತಿದ್ದಾರೆ.

ಈ ಕುರಿತು ಬಾಲಕಿ ಪೋಷಕರು ವಿಡಿಯೋ ಹೇಳಿಕ ಬಿಡುಗಡೆ ಮಾಡಿ ಸ್ಪಷ್ಟಪಡಿಸಿದ್ದಾರೆ. ಈ ವಿಡಿಯೋದಲ್ಲಿ ಮಾತನಾಡಿರುವ ಅಪ್ರಾಪ್ತೆಯ ಪೋಷಕರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ನಮ್ಮ ಮಗಳು ಬರುತ್ತಿದ್ದಳು. ಟಿಕೆಟ್ ಪಡೆಯುವ ಸಂಬಂಧ ಆಗಿರುವ ಜಗಳ ಇದು. ನಾವೂ ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದ ಭಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವಇಚ್ಛೆಯಿಂದ ಪ್ರಕರಣ ವಾಪಸ್ ಪಡೆಯುತ್ತಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಬಾಲಕಿಯ ಪೋಷಕರು ಸ್ಪಷ್ಟನೆ ನೀಡಿದ್ದಾರೆ.