ಬೆಂಗಳೂರು,ಮಾ.17 (DaijiworldNews/AA): ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಸಚಿವರಿಗೆ ಮನವಿ ಸಲ್ಲಿಸಿದೆ.

ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಕುರಿತು ಕ್ರಮ ಕೈಗೊಳ್ಳಲು ಸಂಬಂಧಿತರಿಗೆ ಸೂಚಿಸಿದ್ದಾಗಿ ಪ್ರಕಟಣೆ ತಿಳಿಸಿದೆ.
ಜಾರ್ಜ್ ಫೆನಾರ್ಂಡಿಸ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಅನುಷ್ಟಾನಕ್ಕೆ ತಂದ ಮಹತ್ವದ ಕೊಂಕಣ ರೈಲ್ವೆ ಯೋಜನೆಗೆ ಇಂದಿಗೆ ಸುಮಾರು 30 ವರ್ಷಗಳು ತುಂಬುತ್ತಿದೆ. ಏಕ ಹಳಿಯ ಪ್ರಯಾಣ ಸೌಲಭ್ಯ ಇರುವುದರಿಂದ ಹೆಚ್ಚುವರಿ ರೈಲ್ವೆ ಓಡಾಡಲು ಕಷ್ಟವಾಗುತ್ತದೆ ಮತ್ತು ಕೊಂಕಣ ರೈಲ್ವೆಯಲ್ಲಿ ಅನುದಾನದ ಕೊರತೆ ಇರುವುದರಿಂದ ನೂತನ ರೈಲ್ವೆ ನಿಲ್ದಾಣಗಳೂ ಸೇರಿದಂತೆ, ಮೂಲಭೂತ ಸೌಕರ್ಯ ವ್ಯವಸ್ಥೆಗೆ ಆರ್ಥಿಕ ಕೊರತೆ ಉಂಟಾಗುತ್ತಿದೆ. ಆದ್ದರಿಂದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡುವುದರ ಮೂಲಕ ಭಾರತ ಸರ್ಕಾರದ ಅನುದಾನದ ಪಡೆದು ಕರಾವಳಿ ಪ್ರದೇಶದಲ್ಲೂ ಕೂಡ ಮಹತ್ವದ ರೈಲ್ವೆ ಯೋಜನೆ ಅನುಷ್ಟಾನ ಮಾಡಲು ಅವಕಾಶ ಮಾಡಿಕೊಡಬೇಕೆಂದು ನಿಯೋಗವು ತಿಳಿಸಿದ್ದಾಗಿ ಪ್ರಕಟಣೆ ತಿಳಿಸಿದೆ.
ಈ ಸಂಬಂಧ ಸಚಿವರ ಜೊತೆ ನಿಯೋಗವು ಸುದೀರ್ಘವಾಗಿ ಚರ್ಚಿಸಿತು. ಭಾರತೀಯ ರೈಲ್ವೆಯಲ್ಲಿ ವಿಲೀನಗೊಂಡರೆ, ಮುಂದಿನ ದಿನಗಳಲ್ಲಿ ಸಿಂಗಲ್ ಲೈನನ್ನು ಹೊರತುಪಡಿಸಿ, ಡಬ್ಲಿಂಗ್ ಮಾಡುವುದು ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆ ಅನುಷ್ಟಾನವಾಗುವ ಲಭ್ಯ ಅವಕಾಶವನ್ನು ಸಚಿವರಿಗೆ ನಿಯೋಗ ಮನವರಿಕೆ ಮಾಡಿತು. ಸುದೀರ್ಘ ಚರ್ಚೆಯ ನಂತರ ಎಂ. ಬಿ. ಪಾಟೀಲ್ ಸಹಮತ ವ್ಯಕ್ತಪಡಿಸಿದರು.
ಅಲ್ಲದೇ, ತಕ್ಷಣವೇ ಇಲಾಖಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಂಜುಳಾ ರವರಿಗೆ ದೂರವಾಣಿ ಮೂಲಕ ಸೂಚನೆ ನೀಡಿ ತಕ್ಷಣ ಕಡತ ಸಿದ್ದಪಡಿಸಿ, ಮುಂದೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು, ಭಾರತೀಯ ರೈಲ್ವೆಯಲ್ಲಿ ವಿಲೀನವಾಗುವ ಬಗ್ಗೆ ಸಂಸದರು ಮತ್ತು ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.
ಸಂಸದ ಕೋಟರೊಂದಿಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಉಡುಪಿಯ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿದ್ದರು.