ಬೆಳಗಾವಿ, ಮಾ.29 (DaijiworldNews/AA): ಸೈಬರ್ ವಂಚಕರ ಕಾಟ ತಾಳಲಾರದೇ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಖಾನಾಪುರದ ಬೀಡಿ ಗ್ರಾಮದಲ್ಲಿ ನಡೆದಿದ್ದು, ಮಾ. 28ರಂದು ಈ ಘಟನೆ ಬೆಳಕಿಗೆ ಬಂದಿದೆ.

ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್ (78) ಮೃತ ದಂಪತಿ. ಪತ್ನಿ ಗುರುವಾರ ರಾತ್ರಿ ನಿದ್ರೆ ಮಾತ್ರೆ ಸೇವಿಸಿದ್ದರೆ, ಪತಿ ಚಾಕುವಿನಿಂದ ತಮ್ಮ ಕುತ್ತಿಗೆಗೆ ಚುಚ್ಚಿಕೊಂಡು, ಮನೆಯ ಹಿಂದಿನ ನೀರಿನ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಗೂ ಮುನ್ನ ಡಿಯಾಗೋ ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ಸೈಬರ್ ವಂಚಕರ ಕಾಟ ತಾಳದೇ ಸಾಯುತ್ತಿರುವುದಾಗಿ ತಿಳಿಸಿದ್ದಾರೆ. ಡಿಯಾಗೋ ಅವರು ತಮ್ಮ ನಿವೃತ್ತಿಯ ಬಳಿಕ ಪತ್ನಿಯೊಂದಿಗೆ ಬೀಡಿಯಲ್ಲಿ ವಾಸಿಸುತ್ತಿದ್ದರು. ಅವರಿಗೆ ಮಕ್ಕಳಿರಲಿಲ್ಲ. ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು, ಕೆಲ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಿದ್ದರು. ಇದನ್ನು ಗಮನಿಸಿದ ಸೈಬರ್ ವಂಚಕರು, ದೆಹಲಿಯಿಂದ ವಿಡಿಯೊ ಕಾಲ್ ಮೂಲಕ ಬೆದರಿಕೆ ಒಡ್ಡುತ್ತಿದ್ದರು. 6 ಲಕ್ಷ ರೂ. ಪಡೆದರೂ ಕಿರುಕುಳ ನಿಲ್ಲಿಸಿರಲಿಲ್ಲ.
ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬರು ನಮಗೆ ಪದೇಪದೇ ಬೆದರಿಕೆ ಹಾಕಿದ್ದಾರೆ. ನನ್ನ ಸಿಮ್ನಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಅನಿಲ್ ಯಾದವ್ ಎಂಬ ವ್ಯಕ್ತಿ ಕರೆ ಮಾಡಿ, 'ನಿಮ್ಮ ನಂಬರಿನಿಂದ ನನಗೆ ಬೆತ್ತಲೆ ಚಿತ್ರಗಳು, ಅಶ್ಲೀಲ ಸಂದೇಶಗಳು ರವಾನೆಯಾಗಿವೆ. ನಿಮ್ಮ ವಿರುದ್ಧ ಸೈಬರ್ ಸೆಲ್ಗೆ ದೂರು ನೀಡಿದ್ದೇನೆ' ಎಂದು ಹೇಳಿದ್ದರು' ಎಂದು ಡಿಯಾಗೋ ಅವರು ಡೆತ್ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
'ಬಳಿಕ ಸುಮಿತ ಬಿಸ್ರಾ ಹೆಸರಿನ ವ್ಯಕ್ತಿ ಕರೆ ಮಾಡಿ 'ಅನಿಲ ಅವರ ದೂರಿನ ಮೇಲೆ ನಿಮ್ಮ ಮೇಲೆ ಪ್ರಕರಣ ದಾಖಲಾಗಿದ್ದು, ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡುತ್ತೇನೆ' ಎಂದು ಬೆದರಿಸಿದರು. ಹಣ ನೀಡದೇ ಇದ್ದರೆ ನಿಮ್ಮ ಸಂದೇಶ ಹಾಗೂ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಹೇಳಿದ್ದರು. ಹಣ ಪಡೆದರೂ ಕಿರುಕುಳ ನಿಲ್ಲಿಸಿಲ್ಲ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ದೇಹಗಳನ್ನು ವೈದ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ದಾನ ನೀಡಿ' ಎಂದೂ ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಇನ್ನು 'ಸೈಬರ್ ಅಪರಾಧಿಗಳ ಬೆದರಿಕೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣ ದಾಖಲಾಗಿದೆ. ಮೊಬೈಲ್ ಫೋನ್, ಒಂದು ಚಾಕು, ಡೆತ್ನೋಟ್ ವಶಪಡಿಸಿಕೊಳ್ಳಲಾಗಿದೆ. ಬೆರಳಚ್ಚು ತಜ್ಞರ ಮತ್ತು ಶ್ವಾನದಳದ ತಂಡ ಸ್ಥಳ ಪರಿಶೀಲಿಸಿದೆ' ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.