ಶ್ರೀನಗರ,ಮೇ. 04 (DaijiworldNews/AK): ಪಾಕಿಸ್ತಾನದ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಕೆಲಸ ಕಳೆದುಕೊಂಡಿದ್ದ ಸಿಆರ್ಪಿಎಫ್ ಯೋಧ, ನ್ಯಾಯಕ್ಕಾಗಿ ಪ್ರಧಾನಿ ಮೋದಿಯವರ ಮೊರೆ ಹೋಗಿದ್ದಾರೆ.

41ನೇ ಬೆಟಾಲಿಯನ್ನಲ್ಲಿ ಸಿಆರ್ಪಿಎಫ್ ಯೋಧರಾಗಿದ್ದ ಮುನೀರ್ ಅಹಮದ್ ಪಾಕಿಸ್ತಾನದ ಯುವತಿ ಮೆನಾಲ್ ಖಾನ್ ಅವರನ್ನು ಪ್ರೀತಿಸುತ್ತಿದ್ದರು. ಆಕೆಯ ಜೊತೆ ವಿವಾಹಕ್ಕೆ ಸಿಆರ್ಪಿಎಫ್ ಬಳಿ ಅನುಮತಿಯನ್ನು ಕೋರಿದ್ದರು. ಅವರಿಗೆ ಅನುಮತಿ ನೀಡುವ ಮುನ್ನವೇ ಮುನೀರ್ ಅವರು ವಿವಾಹವಾಗಿದ್ದರು. ಇದರಿಂದ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು.ಮುನೀರ್ ಅಹ್ಮದ್ ಅವರ ಪತ್ನಿ ಮೆನಾಲ್ ಖಾನ್ ಅವರನ್ನು ಗಡೀಪಾರು ಮಾಡುವ ಹಂತದಲ್ಲಿದ್ದರು, ಕೊನೆ ಕ್ಷಣದಲ್ಲಿ ನ್ಯಾಯಾಲಯದಿಂದ ಗಡೀಪಾರಿಗೆ ತಡೆ ತರಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನೀರ್, ವೀಸಾ ಅವಧಿ ಮುಗಿದ ನಂತರವೂ ತನ್ನ ಪತ್ನಿ ಭಾರತದಲ್ಲಿ ಉಳಿದುಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ವಜಾ ಪತ್ರದಲ್ಲಿ ತಿಳಿಸಲಾಗಿದೆ. ಆದರೆ ಈ ಬಗ್ಗೆ ನಾನು ಮಾಹಿತಿ ನೀಡಿದ್ದೇನೆ, ನನ್ನ ಬಳಿ ಪುರಾವೆಗಳಿವೆ. ನಾನು ಸರಿಯಾದ ದಾಖಲೆಗಳನ್ನು ಒದಗಿಸಿದ್ದೇನೆ ಎಂದಿದ್ದಾರೆ.
ಮುನೀರ್ ಅಹ್ಮದ್ ಅವರು ಪಾಕ್ನ ಯುವತಿ ಮೆನಾಲ್ ಖಾನ್ ಅವರನ್ನು ಕಳೆದ ವರ್ಷ ಮೇ 24 ರಂದು ವೀಡಿಯೊ ಕರೆಯಲ್ಲಿ ವಿವಾಹವಾಗಿದ್ದರು. ಅಕ್ಟೋಬರ್ನಲ್ಲಿ ಮದುವೆಯ ಬಗ್ಗೆ ಸಿಆರ್ಪಿಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಮೆನಾಲ್ ಖಾನ್ ಫೆಬ್ರವರಿಯಲ್ಲಿ ವಾಘಾ-ಅಟ್ಟಾರಿ ಗಡಿಯ ಮೂಲಕ ಭಾರತಕ್ಕೆ ಬಂದು ಮುನೀರ್ ಅಹ್ಮದ್ ಜೊತೆ ವಾಸವಾಗಿದ್ದರು. ಅವರ 15 ದಿನಗಳ ವೀಸಾ ಮಾರ್ಚ್ನಲ್ಲಿ ಮುಕ್ತಾಯಗೊಂಡಿತ್ತು.
ನಂತರ ಮುನೀರ್ ದೀರ್ಘಾವಧಿಯ ವೀಸಾಕ್ಕೆ ಅರ್ಜಿ ಸಲ್ಲಿಸಿದ್ದರು. ಇದೇ ವೇಳೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಪಾಕ್ ಪ್ರಜೆಗಳನ್ನು ದೇಶ ತೊರೆಯುವಂತೆ ಆದೇಶಿಸಿತ್ತು. ಇನ್ನೂ ಮೆನಾಲ್ ಖಾನ್ ಅಹ ಗಡೀಪಾರಾಗುವ ಹಂತದಲ್ಲಿದ್ದರು. ಅಷ್ಟರಲ್ಲೇ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಅವರ ಗಡೀಪಾರಿಗೆ ತಡೆ ನೀಡಿತ್ತು.