ಬೆಂಗಳೂರು, ಜೂ. 06 (DaijiworldNews/AK): ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ 50 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಬಳಿಕ ಕರ್ನಾಟಕ ಸರ್ಕಾರವು ಕ್ಷಿಪ್ರ ಆಡಳಿತಾತ್ಮಕ ಬದಲಾವಣೆಯ ಭಾಗವಾಗಿ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನಗರದ ಹೊಸ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದೆ.
ಕಾರ್ಯಕ್ರಮದ ಸಂದರ್ಭದಲ್ಲಿ ಜನಸಂದಣಿಯನ್ನು ನಿರ್ವಹಿಸುವಲ್ಲಿ ತೀವ್ರ ನಿರ್ಲಕ್ಷ್ಯ ಮತ್ತು ವೈಫಲ್ಯವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಗಮಿತ ಪೊಲೀಸ್ ಆಯುಕ್ತ ಬಿ. ದಯಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
1996 ಬ್ಯಾಚ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಮೂಲತಃ ಬಿಹಾರ ಮೂಲದವರು. ಬೆಂಗಳೂರು ಅಡಿಷನಲ್ ಕಮಿಷನರ್, ಸೆಂಟ್ರಲ್ ರೇಂಜ್ ಐಜಿಯಾಗಿ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರು ಪೂರ್ವ ವಿಭಾಗದ ಐಜಿಯಾಗಿ ಕೆಲಸ ನಿರ್ವಹಿಸಿದ್ದರು. ಎಸಿಬಿ ಮುಖ್ಯಸ್ಥರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಈಗ 39 ನೇ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನಿಯುಕ್ತಿಗೊಂಡಿದ್ದಾರೆ.