ನವದೆಹಲಿ, ಜು. 02 (DaijiworldNews/AA): 2023ರ ಡಿಸೆಂಬರ್ 13ರಂದು ಸಂಸತ್ನಲ್ಲಿ ನಡೆದ ಸ್ಮೋಕ್ ಬಾಂಬ್ ಪ್ರಕರಣದ ಇಬ್ಬರು ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ನೀಲಂ ಆಜಾದ್, ಮಹೇಶ್ ಕುಮಾವತ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. ಹಾಗೂ ಆರೋಪಿಗಳಿಗೆ ತಲಾ 50,000 ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಸಲ್ಲಿಸುವಂತೆ ನಿರ್ದೇಶಿಸಿದೆ.
ಪ್ರಕರಣ ಮುಗಿಯುವವರೆಗೆ ದೆಹಲಿ ಬಿಟ್ಟು ಹೋಗದಂತೆ ಕೋರ್ಟ್ ಸೂಚಿಸಿದೆ. ಜೊತೆಗೆ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 10 ಗಂಟೆ ವೇಳೆಗೆ ಗೊತ್ತುಪಡಿಸಿದ ಪೊಲೀಸ್ ಠಾಣೆಗೆ ಹಾಜರಾಗುವಂತೆ ತೀರ್ಪು ನೀಡಿದೆ. ಇದಕ್ಕೂ ಮುನ್ನ ಪ್ರಕರಣದ ವಿಚಾರಣೆ ನಡೆಸಿದ್ದ ಪಟಿಯಾಲ ಹೌಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಹರ್ದೀಪ್ ಕೌರ್ ಆಜಾದ್ ಜಾಮೀಜು ಅರ್ಜಿಯನ್ನು ತಿರಸ್ಕರಿಸಿದ್ದರು.
ಈ ಪ್ರಕರಣದ ಮಾಸ್ಟರ್ ಮೈಂಡ್ಗಳಾದ ಸಾಗರ್ ಶರ್ಮಾ ಹಾಗೂ ಮೈಸೂರಿನ ಮನೋರಂಜನ್ಗೆ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಮನೋರಂಜನ್ ಅಂದಿನ ಸಂಸದ ಪ್ರತಾಪ್ ಸಿಂಹ ಅವರ ಮೂಲಕ ಪಾಸ್ ಪಡೆದು ಸಂಸತ್ ಪ್ರವೇಶಿಸಿದ್ದರು ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ
2023ರ ಡಿಸೆಂಬರ್ 13 ರಂದು ಸಂಸತ್ ಭವನದಲ್ಲಿ ಅಧಿವೇಶನ ನಡೆಯುತ್ತಿದ್ದಾಗ ಕೆಲ ವ್ಯಕ್ತಿಗಳು ಸದನಕ್ಕೆ ನುಗ್ಗಿ ಸ್ಮೋಕ್ ಬಾಂಬ್ ಎಸೆದಿದ್ದರು. ಸಾಗರ್ ಶರ್ಮಾ ಮತ್ತು ಮನೋರಂಜನ್ ಎಂಬ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಬಂದು ಸ್ಮೋಕ್ ಬಾಂಬ್ ಎಸೆದಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ದೆಹಲಿ ಪೊಲೀಸ್ ತಂಡ ಮಾಸ್ಟರ್ ಮೈಂಡ್, ಲಲಿತ್ ಝಾ ಮತ್ತು ಸಹ-ಆರೋಪಿ ಮಹೇಶ್ ಕುಮಾವತ್ ಸೇರಿ ಕೆಲವು ಆರೋಪಿಗಳನ್ನು ಬಂಧಿಸಿತ್ತು.