ಬೆಂಗಳೂರು,ಆ. 09 (DaijiworldNews/ AK): ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿಯವರು ರಾಜ್ಯಕ್ಕೆ ತಾವು ಬರುವ ವಿಚಾರವನ್ನು ಕನ್ನಡದಲ್ಲೇ ಟ್ವೀಟ್ ಮಾಡಿ ತಿಳಿಸಿದ್ದಾರೆ.
“ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಗುವುದು” ಎಂದು ಟ್ವೀಟ್ ಮಾಡಿದ್ದಾರೆ.