ಬೆಂಗಳೂರು,ಆ. 11 (DaijiworldNews/AK): ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ನಲ್ಲಿ ಮಾತನಾಡಿ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂ. ಆದರೂ ಅನುದಾನ ತರಲಿ ಎಂದು ಬಿಜೆಪಿ ಸಂಸದರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಭಾನುವಾರ ಪ್ರಧಾನಿ ಮೋದಿಯವರಿಗೆ ಮನವಿ ಪತ್ರ ಕೊಟ್ಟ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರೂ ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ ಎಂದು ಕಿಡಿಕಾರಿದರು.
ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ ಎಂದರು.