ಬೆಳಗಾವಿ, ಡಿ. 19 (DaijiworldNews/TA): ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಪ್ರಯಾಣಿಸುತ್ತಿದ್ದ ಕಾರು ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಮಂಜುನಾಥ್ ಬೈರ್ನಟ್ಟಿ (30) ಎಂದು ಗುರುತಿಸಲಾಗಿದೆ. ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ರಾಜೇಂದ್ರ ಪ್ರಸಾದ್ ಅವರು ಯಲ್ಲಮ್ಮ ದೇವಿಯ ದರ್ಶನ ಪಡೆದು ಕಾರಿನಲ್ಲಿ ವಾಪಸಾಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ಗೆ ಕಾರು ಡಿಕ್ಕಿಯಾಗಿದೆ. ಕಾರಿನ ರಭಸಕ್ಕೆ ಮಂಜುನಾಥ್ ಅವರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು, ಅವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಅಪಘಾತದಲ್ಲಿ ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.