ಕೊಲ್ಕತ್ತಾ, ಜ. 10 (DaijiworldNews/AA): ಐ-ಪ್ಯಾಕ್ ಕಲ್ಲಿದ್ದಲು ಹಗರಣ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಸಿಎಂ ಮಮತಾ ಬ್ಯಾನರ್ಜಿ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಒತ್ತಾಯಿಸಿದೆ. ಕೊಲ್ಕತ್ತಾ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಕೊಲ್ಕತ್ತಾದಲ್ಲಿರುವ ಐ-ಪ್ಯಾಕ್ ನಿರ್ದೇಶಕ ಪ್ರತೀಕ್ ಜೈನ್ ಅವರ ಮನೆ ಮೇಲೆ ದಾಳಿ ನಡೆದಾಗ ಮಮತಾ ಬ್ಯಾನರ್ಜಿ ಸಂಸ್ಥೆಯ ತನಿಖೆಗೆ ಅಡ್ಡಿಪಡಿಸಿದರು ಮತ್ತು ಅಲ್ಲಿದ್ದ ಮಹತ್ವದ ದಾಖಲೆಗಳನ್ನು ತೆಗೆದುಕೊಂಡರು ಎಂದು ಇಡಿ ಆರೋಪ ಮಾಡಿದೆ.
"ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸುವ ಹಕ್ಕನ್ನು ರಾಜ್ಯ ಸರ್ಕಾರ ಅಡ್ಡಿಪಡಿಸಿದೆ. ರಾಜ್ಯ ಪೊಲೀಸರ ಸಹಾಯದಿಂದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇಡಿ ಅಧಿಕಾರಿಗಳ ಕಾನೂನುಬದ್ಧ ಕಸ್ಟಡಿಯಿಂದ ಡಿಜಿಟಲ್ ಸಾಧನಗಳು, ಎಲೆಕ್ಟ್ರಾನಿಕ್ ಸಂಗ್ರಹಣಾ ಮಾಧ್ಯಮಗಳು ಮತ್ತು ಪ್ರಮುಖ ಅಪರಾಧ ದಾಖಲೆಗಳನ್ನು ಬಲವಂತವಾಗಿ ವಶಪಡಿಸಿಕೊಂಡು, ಮುಚ್ಚಿಟ್ಟಿದ್ದಾರೆ" ಎಂದು ಇಡಿ ಆರೋಪಿಸಿದೆ.
ಕೊಲ್ಕತ್ತಾ ಹೈಕೋರ್ಟ್ ಇಡಿಗೆ ತುರ್ತು ಪರಿಹಾರ ನೀಡಲು ನಿರಾಕರಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಮುಂದೂಡಿತ್ತು. ಹೀಗಾಗಿ, ಇಡಿ ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.