ಮಂಡ್ಯ, ಫೆ. 28 (DaijiworldNews/TA): ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣದಲ್ಲಿ ವಿಭಿನ್ನ ಮಾದರಿಯ ಯೋಜನೆ ಕೈಗೊಳ್ಳಲಾಗಿದೆ. ಇಲ್ಲಿ ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆಯೊಂದಿಗೆ ಪೋಷಣೆಯ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ.

ಶ್ರೀರಂಗಪಟ್ಟಣ ಪುರಸಭೆ ಪಟ್ಟಣದಲ್ಲಿರುವ ಬೀದಿ ನಾಯಿಗಳನ್ನು ಗುರುತಿಸಿ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುವ ಜೊತೆಗೆ ಅವುಗಳನ್ನು ಪೋಷಿಸಲು ಶೆಡ್ಗಳನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ. ಪಟ್ಟಣದ ಜನರು ಮಾಹಿತಿ ನೀಡಿದ ತಕ್ಷಣ ಪುರಸಭೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ನಾಯಿಗಳನ್ನು ಸುರಕ್ಷಿತವಾಗಿ ಕರೆತರುತ್ತಿದ್ದಾರೆ.
ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ಜಾರಿಗೊಳ್ಳುತ್ತಿದ್ದು, ಎರಡು ಬೃಹತ್ ಶೆಡ್ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಒಂದು ಶೆಡ್ನಲ್ಲಿ ಸುಮಾರು 200 ನಾಯಿಗಳನ್ನು ಇರಿಸಲು ವ್ಯವಸ್ಥೆ ಮಾಡಲಾಗುತ್ತದೆ. ಶಸ್ತ್ರಚಿಕಿತ್ಸೆಯ ನಂತರ ನಾಯಿಗಳನ್ನು ಇದೇ ಶೆಡ್ಗಳಲ್ಲಿ ಪೋಷಣೆ ಮಾಡಲಾಗುತ್ತದೆ.
ಪ್ರಸ್ತುತ ಪಟ್ಟಣದಲ್ಲಿ 600 ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಗುರುತಿಸಲಾಗಿದೆ. ಅವುಗಳನ್ನು ಹಂತ ಹಂತವಾಗಿ ಶೆಡ್ಗೆ ಕರೆತಂದು ಪೋಷಣೆ ಮಾಡುವ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಸಾರ್ವಜನಿಕರ ಸುರಕ್ಷತೆ ಹಾಗೂ ಪ್ರಾಣಿಗಳ ಕಲ್ಯಾಣ ಎರಡನ್ನೂ ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ.