ಅಮರಾವತಿ, ಫೆ. 28 (DaijiworldNews/TA): ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಸಾಮರ್ಲಕೋಟ ಮಂಡಲದ ವೆಟ್ಲಪಾಲೆಂ ಗ್ರಾಮದಲ್ಲಿರುವ ಬಾಣಸಂಚ ಉತ್ಪಾದನಾ ಕೇಂದ್ರದಲ್ಲಿ ಈ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆ ಎಷ್ಟು ಹೆಚ್ಚಿತ್ತೆಂದರೆ, ಮೃತದೇಹಗಳು ಛಿದ್ರಗೊಂಡು ಪಕ್ಕದ ಭತ್ತದ ಗದ್ದೆಗಳಿಗೆ ಎಸೆಯಲ್ಪಟ್ಟಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ರಾಜ್ಯದ ಗೃಹ ಸಚಿವೆ ಅನಿತಾ ಪ್ರತಿಕ್ರಿಯೆ ನೀಡಿದ್ದು, “ವೆಟ್ಲಪಾಲೆಂನಲ್ಲಿರುವ ಪಟಾಕಿ ಉತ್ಪಾದನಾ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟ ತೀವ್ರ ಆಘಾತ ಉಂಟುಮಾಡಿದೆ. ಸಾವನ್ನಪ್ಪಿದವರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ತಕ್ಷಣ ಅಗತ್ಯ ನೆರವು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.
ಇನ್ನು ದುರಂತದಲ್ಲಿ ಮೃತಪಟ್ಟವರಿಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಘಟನೆಯಿಂದ ತೀವ್ರ ದುಃಖವಾಗಿದೆ ಎಂದು ಹೇಳಿ, ಸಂತ್ರಸ್ತರಿಗೆ ಅಗತ್ಯ ಸಹಾಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆ ಕುರಿತು ತನಿಖೆ ಆರಂಭಗೊಂಡಿದ್ದು, ಸ್ಫೋಟಕ್ಕೆ ಕಾರಣಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.