ಬೆಂಗಳೂರು,ಏ. 16 (DaijiworldNews/AK): ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ನೀತಿಯನ್ನು ರಾಜ್ಯ ಸರ್ಕಾರವು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಮಹಿಳಾ ಉದ್ಯೋಗಿಗಳಿಗೆ ನೀಡಲು ಹಿಂದೆ-ಮುಂದೆ ನೋಡುತ್ತಿದೆ. ಹಾಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಆದೇಶವನ್ನು ಹೈಕೋರ್ಟ್ ನೀಡಿದೆ.
ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು ಎಂದು ಹೇಳಿದೆ. ಕೇವಲ ಸಾಫ್ಟ್ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, “ಮಹಿಳೆಯರ ಋತುಸ್ರಾವದ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ಬರುವ ‘ಬದುಕುವ ಹಕ್ಕಿನ’ ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ರಜೆಯಲ್ಲ, ಮಹಿಳೆಯರ ಘನತೆಯ ಪ್ರಶ್ನೆ” ಎಂದು ಅಭಿಪ್ರಾಯಪಟ್ಟಿದೆ. ಪ್ರಸ್ತುತ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ, ಈ ಕುರಿತು ಪ್ರಸ್ತಾವಿತ ‘ಕರ್ನಾಟಕ ಋತುಸ್ರಾವ ರಜೆ ಮತ್ತು ನೈರ್ಮಲ್ಯ ವಿಧೇಯಕ-2025’ ಅನ್ನು ಶೀಘ್ರವಾಗಿ ಕಾನೂನಾಗಿ ರೂಪಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ತಮಗೆ ರಜೆ ನೀಡುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ.