ಬೆಂಗಳೂರು, ಏ 16 (DaijiworldNews/MS): ರಾಜ್ಯದಲ್ಲಿ ತೀವ್ರಗತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ತಿಳಿದುಬಂದಿದೆ.

ಈ ನಡುವೆ ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತುರ್ತು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು
ಭಾಗಿಯಾಗಲಿದ್ದು, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಇನ್ನು ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೂ ಕೊರೊನಾ ನಿಯಂತ್ರಣಕ್ಕೆ, ಶಾಲಾ - ಕಾಲೇಜು, ಚಿತ್ರಮಂದಿರ ಬಂದ್ ಮಾಡಲು ಶಿಫಾರಸು ಮಾಡಿದ್ದು, ಜನ ಸೇರುವ ಕಾರ್ಯಕ್ರಮಗಳೆಲ್ಲಾವನ್ನು ನಿಷೇಧಗೊಳಿಸಲು ಸಲಹೆ ನೀಡಿದ್ದಾರೆ.
ಮಾತ್ರವಲ್ಲದೆ ಬಾರ್ಬರ್ ಶಾಪ್, ಪಬ್ ದೇವಸ್ಥಾನ ಚರ್ಚ್ ಮಸೀದಿ ಸೇರಿದಂತೆ ಧಾರ್ಮಿಕ ಕೇಂದ್ರ, ಮಾರುಕಟ್ಟೆ ಹೀಗೆ ಜನ ಸೇರುವ ಪ್ರದೇಶಗಳನ್ನು ಮುಚ್ಚುವಂತೆ ಶಿಫಾರಸ್ಸು ಮಾಡಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿದ ಶಿಫಾರಸ್ಸುಗಳ ಬಗ್ಗೆ ಮುಖ್ಯಮಂತ್ರಿಗಳು ತುರ್ತು ಸಭೆಯಲ್ಲಿ ಚರ್ಚಿಸಿ ಕಠಿಣ ಕ್ರಮ ಜಾರಿಗೊಳಿಸುವ ಸಾಧ್ಯತೆ ಇದೆ.