ಬೆಂಗಳೂರು, ಮಾ 15 (DaijiworldNews/DB): ಹಿಜಾಬ್ ವಿಚಾರವಾಗಿ ನ್ಯಾಯಾಲಯ ಯಾವುದೇ ರೀತಿಯ ತೀರ್ಪು ನೀಡಿದರೂ ನಾವು ತಲೆ ಬಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಆರ್ ಟಿ ನಗರ ಸಿಎಂ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕೋರ್ಟ್ ತೀರ್ಪಿಗೆ ಎಲ್ಲರೂ ಗೌರವ ಕೊಡಬೇಕು. ಕೋರ್ಟ್, ಸಂವಿಧಾನದ ವಿರುದ್ಧ ನಾವು ಮಾತನಾಡಲು ಆಗುವುದಿಲ್ಲ ಎಂದರು.
ತೀರ್ಪು ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವೊಂದು ಜಿಲ್ಲೆಗಳಲ್ಲಿ ಕಠಣ ಕ್ರಮಕ್ಕೆ ಸೂಚಿಸಲಾಗಿದೆ. ಆದಾಗ್ಯೂ ಕರ್ನಾಟಕದ ಜನತೆ ಶಾಂತಿಪ್ರಿಯರು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದವರು ಮನವಿ ಮಾಡಿದರು.
ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಫೀಲ್ಡ್ ನಲ್ಲಿರಲು ಸೂಚಿಸಲಾಗಿದೆ ಎಂದವರು ತಿಳಿಸಿದರು.